ಯಾದಗಿರಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಭಾರತ್ಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಚೆನ್ನೈ–ಸೂರತ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ಯಾಕೇಜ್–3 ಅನ್ನು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಅವರು ಇಂದು ವೀಕ್ಷಿಸಿದರು. ಎಡೆದೊರೆ ನ್ಯೂಸ್
ಪ್ಯಾಕೇಜ್–3ರ ವ್ಯಾಪ್ತಿಯಲ್ಲಿ ಬಸಂತಪುರದಿಂದ ಶಹಾಪುರ ತಾಲೂಕಿನ ಸಿರವಾಳ ಗ್ರಾಮವರೆಗೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ ಸಂಸದರು, ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಹೆದ್ದಾರಿ ನಿರ್ಮಾಣದಿಂದ ರೈತರು ಹಾಗೂ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯವಿರುವ ಕಡೆಗಳಲ್ಲಿ ಅಂಡರ್ಪಾಸ್ಗಳನ್ನು ನಿರ್ಮಿಸಬೇಕು. ರೈತರು ತಮ್ಮ ಜಮೀನುಗಳಿಗೆ ಸುಗಮವಾಗಿ ತೆರಳಲು ಅನುಕೂಲವಾಗುವಂತೆ ಸರ್ವೀಸ್ ರಸ್ತೆಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅದೇ ರೀತಿ, ಗ್ರಾಮಗಳ ಪ್ರವೇಶ–ನಿರ್ಗಮನ, ಅಂಡರ್ಪಾಸ್, ಸರ್ವೀಸ್ ರಸ್ತೆ ಹಾಗೂ ತಿರುವುಗಳಿರುವ ಸ್ಥಳಗಳಲ್ಲಿ ವಾಹನ ಸವಾರರಿಗೆ ಸ್ಪಷ್ಟವಾಗಿ ಮಾಹಿತಿ ದೊರೆಯುವಂತೆ ಸೂಚನಾ ಫಲಕಗಳನ್ನು ಅಳವಡಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ರೈತರು ತಮ್ಮ ಜಮೀನುಗಳಿಗೆ ತೆರಳುವ ದಾರಿಗಳು ಬಂದ್ ಆಗದಂತೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸಬೇಕು. ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ಹಾಗೂ ನೀರು ಹರಿದುಹೋಗುವ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ಮಿಸಬೇಕು ಎಂದು ಸೂಚಿಸಿದರು.
ಕಾಮಗಾರಿಯಲ್ಲಿ ಬಳಸುವ ಸಾಮಗ್ರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ನಿಗದಿತ ಮಾನದಂಡಗಳಂತೆ ಕಾಮಗಾರಿ ಕೈಗೊಂಡು ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಜೊತೆಗೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಜಿ. ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೆದ್ದಾರಿ ಕಾಮಗಾರಿಯಿಂದ ಸ್ಥಳೀಯ ಜನರು ಹಾಗೂ ರೈತರಿಗೆ ಉಂಟಾಗಬಹುದಾದ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳದಲ್ಲಿಯೇ ಪರಿಶೀಲಿಸಿ, ಅವುಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಕಾಮಗಾರಿಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸುವುದರ ಜೊತೆಗೆ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ NHAI ಯೋಜನಾ ನಿರ್ದೇಶಕರು, ಪ್ಲಾನಿಂಗ್ ಮ್ಯಾನೇಜರ್, ಸಂಬಂಧಪಟ್ಟ ಅಧಿಕಾರಿಗಳು, ಕಾಮಗಾರಿ ಗುತ್ತಿಗೆ ಸಂಸ್ಥೆಯ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಿರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪಟ್ಟಣದ ಇಂದಿರಾ ನಗರದ 'ರಂಗಶಿವ' ಜ್ಞಾನ…
ಸಿರವಾರ: ಚಿತ್ರನಟ ಕಿಚ್ಚ ಸುದೀಪ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಿರವಾರದ ಸುದೀಪ್ ಅಭಿಮಾನಿ ಯುವ ಬಳಗ ಮಾದರಿಯಾಗಿದೆ.…
ರಾಯಚೂರು: ಲಿಂಗಸ್ಗೂರಿನಿಂದ ಬಳ್ಳಾರಿವರೆಗೆ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿದ್ದು, ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜಕೀಯ ಮೈಲೇಜ್ ಪಡೆಯುವ ಉದ್ದೇಶದಿಂದ…
ಸಿರವಾರ: ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಚಾಗಬಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ಕ್ಕೆ ಸಂಬಂಧಿಸಿದ ಹಗರಣಗಳ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ವೈಭವದ ಸರ್ವಸಮರ್ಪಣೋತ್ಸವ, ಮರದ ರಥದಲ್ಲಿ ವಾಹನಗಳ ಮೆರವಣಿಗೆ ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು ಗುರುವಾರ ವೈಭವದಿಂದ…